ಬೆಂಗಳೂರು, ನ.10:
ರಾಜ್ಯದ ಜೈಲುಗಳಲ್ಲಿ ನಡೆಯುತ್ತಿರುವ ಕಾನೂನುಬಾಹಿರ ಚಟುವಟಿಕೆಗಳ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ವಿವಿಧ ಜೈಲುಗಳಲ್ಲಿ ಮೊಬೈಲ್ ಫೋನ್ಗಳು, ಗಾಂಜಾ, ಮದ್ಯಪಾನ ಪದಾರ್ಥಗಳು ಹಾಗೂ ಇತರ ನಿಷೇಧಿತ ವಸ್ತುಗಳು ಒಳಗಡೆ ಹೋಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಸಚಿವರು ಕಿಡಿ ಹೊರಹಾಕಿ,
“ಸರ್ಕಾರ ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಇದರ ಹೊಣೆಗಾರರು ಬಂದಿಖಾನೆ ಅಧಿಕಾರಿಗಳು ಮತ್ತು ಮುಖ್ಯಸ್ಥರು,”ಎಂದು ಎಚ್ಚರಿಸಿದರು.
ಸಚಿವರು ಮುಂದುವರಿಸಿ,
“ಜೈಲುಗಳ ಆಡಳಿತ ಸರಿಯಾಗಿ ನಡೆಯದಿದ್ದರೆ ಅದರ ಸಂಪೂರ್ಣ ಜವಾಬ್ದಾರಿ ಅಧಿಕಾರಿಗಳದ್ದೇ. ಈಗಾಗಲೇ ಮುಖ್ಯಮಂತ್ರಿಗಳು ಕೂಡ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಅದಕ್ಕಾಗಿ ಇಂದು ಉನ್ನತ ಮಟ್ಟದ ಸಭೆ ಕರೆಯಲಾಗಿದೆ,”
ಎಂದು ಹೇಳಿದರು.
ಗೃಹ ಸಚಿವರು ಇದೇ ಹಿನ್ನೆಲೆಯಲ್ಲಿ ಜೈಲು ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಬಂದಿಖಾನೆಗಳಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಬಗ್ಗೆ ಸಂಪೂರ್ಣ ವರದಿ ಕೇಳಿಕೊಂಡಿದ್ದಾರೆ.
ಸಭೆಯಲ್ಲಿ ಪಡೆದ ಮಾಹಿತಿಯ ಆಧಾರದ ಮೇಲೆ ಸರ್ಕಾರ ಶೀಘ್ರದಲ್ಲೇ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದರು.


