ನವದೆಹಲಿ: ಪ್ರಜಾಪ್ರಭುತ್ವದ ಯಶಸ್ಸು ಮತ್ತು ರಾಷ್ಟ್ರದ ಅಭಿವೃದ್ಧಿಗೆ ಜನರ ಸಕ್ರಿಯ ಹಾಗೂ ಸಮಗ್ರ ಪಾಲ್ಗೊಳ್ಳುವಿಕೆ ಅತ್ಯಗತ್ಯ ಎಂದು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅಭಿಪ್ರಾಯಪಟ್ಟಿದ್ದಾರೆ.
ನವದೆಹಲಿದಲ್ಲಿ ಆಯೋಜಿಸಲಾದ ‘ವಿಕಸಿತ ಭಾರತ ಯುವ ಸಂಸತ್-2026’ ಕಾರ್ಯಕ್ರಮದ ಭಾಗವಹಿಸಿದ ಯುವಕರೊಂದಿಗೆ ಸಂವಾದ ನಡೆಸಿದ ಅವರು, ಭಾರತದ ಪ್ರಜಾಪ್ರಭುತ್ವದ ಶಕ್ತಿ ಮತ್ತು ಅದರ ಬೆಳವಣಿಗೆಯ ಕುರಿತು ಮಾತನಾಡಿದರು.
ಸ್ವಾತಂತ್ರ್ಯಾನಂತರ ವಿವಿಧ ಸಂಸ್ಕೃತಿಗಳು, ಭಾಷೆಗಳು ಹಾಗೂ ಭೌಗೋಳಿಕ ವೈವಿಧ್ಯತೆಯನ್ನು ಹೊಂದಿರುವ ಅಪಾರ ಜನಸಂಖ್ಯೆಯ ದೇಶವಾಗಿದ್ದರೂ, ಭಾರತ ಇಂದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಅವರು ಹೇಳಿದರು.
ಜನಸಾಮಾನ್ಯರ ಹೆಚ್ಚುತ್ತಿರುವ ಭಾಗವಹಿಸುವಿಕೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಮೇಲಿನ ನಂಬಿಕೆಯೇ ಈ ಸಾಧನೆಗೆ ಪ್ರಮುಖ ಕಾರಣವಾಗಿದೆ ಎಂದು ಓಂ ಬಿರ್ಲಾ ಅಭಿಪ್ರಾಯಪಟ್ಟರು.
ಪ್ರಜಾಪ್ರಭುತ್ವವು ಭಾರತದ ಕಾರ್ಯಸಂಸ್ಕೃತಿ ಮತ್ತು ಚಿಂತನಾ ಪರಂಪರೆಯ ಅವಿಭಾಜ್ಯ ಅಂಗವಾಗಿದ್ದು, ರಾಷ್ಟ್ರದ ನಿರ್ಧಾರ ಪ್ರಕ್ರಿಯೆಯಲ್ಲಿ ಜನರ ಪಾಲ್ಗೊಳ್ಳುವಿಕೆ ನಿರಂತರವಾಗಿ ವಿಸ್ತರಿಸುತ್ತಿದೆ ಎಂದು ಅವರು ಹೇಳಿದರು.
‘ವಿಕಸಿತ ಭಾರತ’ದ ಕನಸನ್ನು ಸಾಕಾರಗೊಳಿಸಲು ಯುವಜನರು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ದೇಶದ ಭವಿಷ್ಯ ರೂಪಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಿದ್ದು, ಸಮಗ್ರ ಮತ್ತು ಒಳಗೊಂಡಿರುವ ಪ್ರಜಾಪ್ರಭುತ್ವವೇ ಅಭಿವೃದ್ಧಿ ಹೊಂದಿದ ಭಾರತದ ಗುರಿ ಸಾಧಿಸಲು ನೆರವಾಗಲಿದೆ ಎಂದು ಅವರು ತಿಳಿಸಿದರು.
ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಇಂತಹ ಕಾರ್ಯಕ್ರಮಗಳು ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಓಂ ಬಿರ್ಲಾ ಹೇಳಿದರು.


