ನವದೆಹಲಿ: ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ನವದೆಹಲಿಯಲ್ಲಿ ನಡೆದ 2025-26ನೇ ಸಾಲಿನ 36ನೇ ರಾಷ್ಟ್ರೀಯ ಯುವ ಸಂಸತ್ ಸ್ಪರ್ಧೆಯ ಕೇಂದ್ರಿಯ ವಿದ್ಯಾಲಯಗಳ ವಿಭಾಗದ ವಿಜೇತರಿಗೆ ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ದೊಡ್ಡ ಕನಸು ಕಾಣಬೇಕು, ಆ ಕನಸುಗಳನ್ನು ಗುರಿಗಳಾಗಿ ರೂಪಿಸಿಕೊಂಡು ಸ್ಪಷ್ಟ ಯೋಜನೆಯೊಂದಿಗೆ ಅವುಗಳನ್ನು ಸಾಕಾರಗೊಳಿಸಬೇಕು ಎಂದು ಕರೆ ನೀಡಿದರು. ಯುವಜನರು ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಕೊಡುಗೆ ನೀಡುವ ವಿಶ್ವಾಸ ವ್ಯಕ್ತಪಡಿಸಿದ ಅವರು, ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಗಾಗಿ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಎಲ್ಲರಿಗೂ ‘ಲೈಫ್ಸ್ಟೈಲ್ ಫಾರ್ ಎನ್ವಿರಾನ್ಮೆಂಟ್ (LiFE)’ ಪ್ರತಿಜ್ಞೆ ಬೋಧಿಸಲಾಯಿತು.
ಸಂಸದೀಯ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ನಿಕುಂಜ ಬಿಹಾರಿ ಧಾಲ್ ಮಾತನಾಡಿ, ಸ್ಪರ್ಧಾಳುಗಳು ಸಂಸದೀಯ ನಿಯಮಗಳು ಮತ್ತು ಕಾರ್ಯವಿಧಾನಗಳ ಬಗ್ಗೆ ಉತ್ತಮ ಜ್ಞಾನ ಪ್ರದರ್ಶಿಸುವುದರ ಜೊತೆಗೆ ನಾಯಕತ್ವ ಗುಣ ಹಾಗೂ ಆತ್ಮವಿಶ್ವಾಸವನ್ನೂ ತೋರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಯುವ ಸಂಸತ್ ಕಾರ್ಯಕ್ರಮವು ಯುವಜನರಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಪ್ರಮುಖ ವೇದಿಕೆಯಾಗಿದ್ದು, ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಅವರು ಹೇಳಿದರು.


