ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಮುಂಬೈ ನಗರ, ಮುಂಬೈ ಉಪನಗರ, ಠಾಣೆ ಹಾಗೂ ಪಾಲ್ಘರ್ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆ ಮನವಿ ಮಾಡಿದೆ.
ಮುಂಬೈನ ಗೊರೆಗಾಂವ್, ಜೋಗೇಶ್ವರಿ, ಮಾಲಾಡ್, ಬೊರಿವಲಿ, ಮುಲುಂಡ್ ಸೇರಿದಂತೆ ಪಶ್ಚಿಮ ಉಪನಗರಗಳು ಹಾಗೂ ಭಾಂಡುಪ್, ವಿಕ್ರೋಲಿ, ಘಾಟ್ಕೋಪರ್, ಕುರ್ಲಾ ಸೇರಿದಂತೆ ಪೂರ್ವ ಉಪನಗರಗಳಲ್ಲಿ ಧಾರಾಕಾರ ಮಳೆಯಾಗಿದೆ. ಪರಿಣಾಮವಾಗಿ ಹಲವು ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನಕ್ಕೆ ತೊಂದರೆ ಉಂಟಾಗಿದೆ.
ಭಾರೀ ಮಳೆಯಿಂದ ನಗರದಲ್ಲಿ ವಾಹನ ಸಂಚಾರ ನಿಧಾನಗೊಂಡಿದ್ದು, ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ದಟ್ಟಣೆ ಕಂಡುಬಂದಿದೆ. ಇದೇ ವೇಳೆ, ಸೆಂಟ್ರಲ್ ರೈಲ್ವೆಯ ಉಪನಗರ ರೈಲು ಸೇವೆಗಳು 10 ರಿಂದ 15 ನಿಮಿಷಗಳವರೆಗೆ ವಿಳಂಬವಾಗಿ ಸಂಚರಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೊಂದೆಡೆ, ನವಿ ಮುಂಬೈ ಮತ್ತು ಠಾಣೆ ಪ್ರದೇಶಗಳಲ್ಲೂ ಧಾರಾಕಾರ ಮಳೆಯ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ವಾಹನ ಸಂಚಾರದ ಮೇಲೂ ಪರಿಣಾಮ ಬೀರಿದೆ. ಹವಾಮಾನ ಇಲಾಖೆ ಮುಂದಿನ ಕೆಲ ಗಂಟೆಗಳ ಕಾಲ ಪರಿಸ್ಥಿತಿಯ ಮೇಲೆ ನಿಗಾ ಇರಿಸಿ, ಅಗತ್ಯವಿದ್ದಲ್ಲಿ ಮಾತ್ರ ಹೊರಗೆ ಸಂಚರಿಸುವಂತೆ ನಾಗರಿಕರಿಗೆ ಸಲಹೆ ನೀಡಿದೆ.


