ಅಸ್ಸಾಂ ಪ್ರವಾಹ ಪರಿಸ್ಥಿತಿ: ಕೇಂದ್ರದಿಂದ ಸಂಪೂರ್ಣ ಸಹಕಾರದ ಭರವಸೆ
ಇತ್ತೀಚಿನ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಸ್ಸಾಂ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದ್ದಾರೆ.
ಗುವಾಹಟಿಯಲ್ಲಿ ನಿನ್ನೆ ನಡೆದ ಪ್ರವಾಹ ಪರಿಶೀಲನಾ ಸಭೆಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರೊಂದಿಗೆ ಭಾಗವಹಿಸಿದ್ದ ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂನ ಪ್ರವಾಹ ಪರಿಸ್ಥಿತಿ ಹಾಗೂ ಉಂಟಾಗಿರುವ ಹಾನಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸಭೆಯಲ್ಲಿ ಅಸ್ಸಾಂ ಮುಖ್ಯ ಕಾರ್ಯದರ್ಶಿ ರವಿ ಕೋಟಾ ಮಾಹಿತಿ ನೀಡಿ, ಈ ವರ್ಷದ ಮೊದಲ ದೊಡ್ಡ ಪ್ರವಾಹದಿಂದ ರಾಜ್ಯದ 13 ಜಿಲ್ಲೆಗಳು ತೀವ್ರವಾಗಿ ಬಾಧಿತವಾಗಿದ್ದು, ಸುಮಾರು 72 ಸಾವಿರ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದರು. ಇದರಲ್ಲಿ ಧೇಮಾಜಿ ಜಿಲ್ಲೆ ಅತ್ಯಂತ ಹೆಚ್ಚು ಹಾನಿಗೊಳಗಾಗಿದ್ದು, ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಪ್ರವಾಹದ ಪರಿಣಾಮ ಎದುರಿಸುತ್ತಿದ್ದಾರೆ.
ಪ್ರವಾಹದಿಂದಾಗಿ ಧೇಮಾಜಿ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದು, ಎಂಟು ಮಂದಿ ನಾಪತ್ತೆಯಾಗಿದ್ದಾರೆ. ಅಲ್ಲದೆ ರಸ್ತೆ, ಸೇತುವೆಗಳು, ಮನೆಗಳು ಹಾಗೂ ಕೃಷಿ ಭೂಮಿ ಸೇರಿದಂತೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿಗೆ ಹಾನಿಯಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂ ಮತ್ತು ಅರುಣಾಚಲ ಪ್ರದೇಶದ ಪ್ರವಾಹ ಪರಿಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರ ಗಂಭೀರ ಕಳವಳ ಹೊಂದಿದೆ ಎಂದು ಹೇಳಿದರು.
“ನವದೆಹಲಿಗೆ ಮರಳಿದ ಬಳಿಕ ಪ್ರವಾಹದ ಸ್ಥಿತಿಗತಿಯ ಕುರಿತು ವಿವರವಾದ ವರದಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಲಾಗುವುದು. ಜೊತೆಗೆ ಉಭಯ ರಾಜ್ಯಗಳಲ್ಲಿ ಉಂಟಾಗಿರುವ ಹಾನಿಯ ಸಮಗ್ರ ಮೌಲ್ಯಮಾಪನಕ್ಕಾಗಿ ಶೀಘ್ರವೇ ಉನ್ನತ ಮಟ್ಟದ ಕೇಂದ್ರ ಅಂತರ-ಸಚಿವಾಲಯ ತಂಡವನ್ನು ಕಳುಹಿಸಲಾಗುವುದು,” ಎಂದು ಅವರು ತಿಳಿಸಿದರು.
ಕೇಂದ್ರ ಸರ್ಕಾರ ಅಗತ್ಯ ಪರಿಹಾರ ಹಾಗೂ ಪುನರ್ವಸತಿ ಕ್ರಮಗಳಿಗೆ ಎಲ್ಲಾ ರೀತಿಯ ನೆರವು ನೀಡಲಿದೆ ಎಂಬ ಭರವಸೆಯನ್ನು ಕೂಡ ಶಿವರಾಜ್ ಸಿಂಗ್ ಚೌಹಾಣ್ ಪುನರುಚ್ಚರಿಸಿದರು.


