ನವದೆಹಲಿ: ಸ್ವಾಮಿ ವಿವೇಕಾನಂದರ ಪುಣ್ಯಸ್ಮರಣೆ ಅಂಗವಾಗಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಸ್ವಾಮಿ ವಿವೇಕಾನಂದರು ಮಹಾನ್ ದೇಶಭಕ್ತ, ತತ್ವಜ್ಞಾನಿ ಹಾಗೂ ಆಧ್ಯಾತ್ಮಿಕ ದಾರ್ಶನಿಕರಾಗಿದ್ದರು ಎಂದು ಸ್ಮರಿಸಿದ್ದಾರೆ.
ಭಾರತದ ನಾಗರಿಕತೆಯ ಆತ್ಮಸಾಕ್ಷಾತ್ಕಾರವನ್ನು ಮರುಜಾಗೃತಿಗೊಳಿಸಿದ ಅವರು, ಭಾರತದ ಶಾಶ್ವತ ಜ್ಞಾನ ಪರಂಪರೆಯನ್ನು ಜಗತ್ತಿನಾದ್ಯಂತ ಪರಿಚಯಿಸಿದ ಮಹಾನ್ ವ್ಯಕ್ತಿತ್ವ ಎಂದು ಬಣ್ಣಿಸಿದರು.
ಆತ್ಮವಿಶ್ವಾಸ, ಜ್ಞಾನ ಮತ್ತು ಕರುಣೆಯಿಂದ ಕೂಡಿದ ಭಾರತದ ಕನಸನ್ನು ಸ್ವಾಮಿ ವಿವೇಕಾನಂದರು ಕಂಡಿದ್ದರು. ಅವರ ಆದರ್ಶಗಳು ಇಂದಿಗೂ ದೇಶದ ಅಭಿವೃದ್ಧಿಯ ಪಯಣಕ್ಕೆ ದಾರಿದೀಪವಾಗಿವೆ ಎಂದು ಅವರು ಹೇಳಿದ್ದಾರೆ. ರಾಷ್ಟ್ರ ನಿರ್ಮಾಣಕ್ಕೆ ಸಮರ್ಪಣೆ, ಉನ್ನತ ವ್ಯಕ್ತಿತ್ವ ಮತ್ತು ಸೇವಾ ಮನೋಭಾವ ಬೆಳೆಸುವಲ್ಲಿ ವಿವೇಕಾನಂದರ ಚಿಂತನೆಗಳು ಎಲ್ಲರಿಗೂ ಪ್ರೇರಣೆಯಾಗಲಿ ಎಂದು ಆಶಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೂಡ ಸ್ವಾಮಿ ವಿವೇಕಾನಂದರಿಗೆ ನಮನ ಸಲ್ಲಿಸಿ, ಭಾರತದ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ರಾಷ್ಟ್ರೀಯ ಚೇತನವನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಿದ ಅವರ ಕೊಡುಗೆ ಅನನ್ಯ ಎಂದು ಹೇಳಿದ್ದಾರೆ.
ಸ್ವಾಮಿ ವಿವೇಕಾನಂದರ ಚಿಂತನೆಗಳು ಮತ್ತು ಪ್ರೇರಣಾದಾಯಕ ಸಂದೇಶಗಳು ಇಂದಿಗೂ ಲಕ್ಷಾಂತರ ಯುವಕರಿಗೆ ದಿಕ್ಕು ತೋರಿಸುತ್ತಿವೆ ಎಂದು ಪ್ರಧಾನಿ ಹೇಳಿದ್ದಾರೆ.
‘ವಿಕಸಿತ ಭಾರತ’ ನಿರ್ಮಾಣದ ಸಂಕಲ್ಪ ಸಾಕಾರಗೊಳಿಸುವ ಪಯಣದಲ್ಲಿ ಸ್ವಾಮಿ ವಿವೇಕಾನಂದರ ಆಧ್ಯಾತ್ಮಿಕ ಸಂದೇಶಗಳು ದೇಶಕ್ಕೆ ಹೊಸ ಶಕ್ತಿ ಮತ್ತು ಮಾರ್ಗದರ್ಶನ ನೀಡುತ್ತಲೇ ಇರುತ್ತವೆ ಎಂದು ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.


