ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಜನ್ಮಜಯಂತಿ; ದೇಶದಾದ್ಯಂತ ಗೌರವ ನಮನ

1 Min Read
1 Min Read

ನವದೆಹಲಿ: ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮಜಯಂತಿಯ ಅಂಗವಾಗಿ ದೇಶಾದ್ಯಂತ ಇಂದು ಗೌರವ ನಮನ ಸಲ್ಲಿಸಲಾಗುತ್ತಿದೆ. ಅವರ 125ನೇ ಜನ್ಮವರ್ಷಾಚರಣೆ ಅಂಗವಾಗಿ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಕೇಂದ್ರ ಸರ್ಕಾರ ಕಳೆದ ವರ್ಷ ಘೋಷಿಸಿದ್ದ ಎರಡು ವರ್ಷಗಳ ಅಧಿಕೃತ 125ನೇ ಜನ್ಮವರ್ಷಾಚರಣೆಯ ಅಂಗವಾಗಿ ಈ ಕಾರ್ಯಕ್ರಮಗಳು ನಡೆಯುತ್ತಿವೆ.

ಇಂದಿನ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರುವರು.

ಕೊಲ್ಕತ್ತಾಗೆ ಆಗಮಿಸಲಿರುವ ಅಮಿತ್ ಶಾ, ಮೊದಲಿಗೆ ನ್ಯೂಟೌನ್‌ನ ಇಕೋ ಪಾರ್ಕ್ನಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ 125 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಬಳಿಕ ಭವನೀಪುರದಲ್ಲಿರುವ ಡಾ. ಮುಖರ್ಜಿ ಅವರ ಪಾರಂಪರಿಕ ನಿವಾಸಕ್ಕೆ ಭೇಟಿ ನೀಡಿ, ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಿದ್ದಾರೆ. ಸಂಜೆ ವಿಶ್ವ ಬಂಗ್ಲಾ ಮೇಳ ಪ್ರಾಂಗಣದಲ್ಲಿ ಆಯೋಜಿಸಿರುವ ಜನ್ಮಜಯಂತಿ ಕಾರ್ಯಕ್ರಮದಲ್ಲೂ ಅವರು ಭಾಗವಹಿಸಲಿದ್ದಾರೆ.

ಇನ್ನೊಂದೆಡೆ, ಪಶ್ಚಿಮ ಬಂಗಾಳ ವಿಧಾನಸಭೆಯ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಭವನೀಪುರದ ಮಿತ್ರಾ ಇನ್‌ಸ್ಟಿಟ್ಯೂಷನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರಿಗೆ ಗೌರವ ನಮನ ಸಲ್ಲಿಸಲಿದ್ದಾರೆ.

Share This Article