ಹಸಿರು ದೆಹಲಿ ನಿರ್ಮಾಣಕ್ಕೆ ಮಹಾ ಅಭಿಯಾನ: 70 ಲಕ್ಷ ಸಸಿ ನೆಡುವ ಯೋಜನೆಗೆ ಅಮಿತ್ ಶಾ ಚಾಲನೆ

1 Min Read
1 Min Read

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಹಸಿರು ವಲಯವನ್ನು ವಿಸ್ತರಿಸುವ ಉದ್ದೇಶದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ‘ಏಕ್ ಪೇಡ್ ಮಾಂ ಕೆ ನಾಮ್’ ಅಭಿಯಾನದಡಿ 70 ಲಕ್ಷ ಸಸಿಗಳನ್ನು ನೆಡುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, ದೆಹಲಿಯ ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದ ನಿಟ್ಟಿನಲ್ಲಿ ಈ ಅಭಿಯಾನ ಮಹತ್ವದ ಹೆಜ್ಜೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಫಲವಾಗಿ ‘ಏಕ್ ಪೇಡ್ ಮಾಂ ಕೆ ನಾಮ್’ ಅಭಿಯಾನ ದೇಶಾದ್ಯಂತ ಜನಜಾಗೃತಿ ಮೂಡಿಸುತ್ತಿದೆ ಎಂದು ಹೇಳಿದರು.

ಯಮುನಾ ನದಿಯ ಪುನಶ್ಚೇತನಕ್ಕಾಗಿ ಕೇಂದ್ರ ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ಒಂದು ವರ್ಷದಲ್ಲಿ 129 ಒಳಚರಂಡಿ ನೀರು ಶುದ್ಧೀಕರಣ ಘಟಕಗಳು (STPs) ಕಾರ್ಯಾರಂಭ ಮಾಡಿವೆ. ಇದರ ಪರಿಣಾಮ ಶುದ್ಧೀಕರಿಸಿದ ನೀರನ್ನು ಯಮುನಾ ನದಿಗೆ ಹರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ದೆಹಲಿ ಸರ್ಕಾರ ಹೊಸ ಎಲೆಕ್ಟ್ರಿಕ್ ವಾಹನ (EV) ನೀತಿ ಜಾರಿಗೆ ತಂದಿದ್ದು, ಪರಿಸರ ಸ್ನೇಹಿ ಹಾಗೂ ಹಸಿರು ದೆಹಲಿ ನಿರ್ಮಾಣಕ್ಕೆ ಬದ್ಧವಾಗಿದೆ ಎಂದು ಅಮಿತ್ ಶಾ ಹೇಳಿದರು.

ಪ್ರತಿಯೊಬ್ಬ ನಾಗರಿಕರೂ ತಮ್ಮ ತಾಯಿಯ ಹೆಸರಿನಲ್ಲಿ ಒಂದು ಸಸಿ ನೆಟ್ಟು ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

ಪರಿಸರ ಸಂರಕ್ಷಣೆಯಲ್ಲಿ ದೆಹಲಿ ರಿಡ್ಜ್ ಪ್ರದೇಶದ ಪುನರುಜ್ಜೀವನ ಅತ್ಯಂತ ಪ್ರಮುಖವಾಗಿದ್ದು, ಈಗಾಗಲೇ ಸುಮಾರು 5,000 ಹೆಕ್ಟೇರ್ ಪ್ರದೇಶವನ್ನು ಅಧಿಕೃತವಾಗಿ ಅರಣ್ಯ ಭೂಮಿಯಾಗಿ ಘೋಷಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಹಸಿರು ದೆಹಲಿ ನಿರ್ಮಾಣದ ಈ ಅಭಿಯಾನ ಪರಿಸರ ಸಂರಕ್ಷಣೆಯ ಜೊತೆಗೆ ಮುಂದಿನ ಪೀಳಿಗೆಗೆ ಆರೋಗ್ಯಕರ ಮತ್ತು ಸ್ವಚ್ಛ ವಾತಾವರಣ ಒದಗಿಸುವ ಮಹತ್ವದ ಹೆಜ್ಜೆಯಾಗಲಿದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.

Share This Article