ಬ್ಯಾಂಕಾಕ್: ಥಾಯ್ಲೆಂಡ್ನ ರಾಜಧಾನಿ ಬ್ಯಾಂಕಾಕ್ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 27 ಮಂದಿ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರಲ್ಲಿ 9 ಪುರುಷರು ಮತ್ತು 18 ಮಹಿಳೆಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ರಾತ್ರಿ ಮಧ್ಯರಾತ್ರಿಯ ಬಳಿಕ ಅಗ್ನಿಶಾಮಕ ದಳಕ್ಕೆ ತುರ್ತು ಕರೆ ಬಂದಿದ್ದು, ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬೆಂಕಿಯ ಕೆನ್ನಾಲಿಗೆಯಲ್ಲಿ ಸಿಲುಕಿದ್ದ ಬಾರ್ನ ಮುಂಭಾಗದ ಪ್ರವೇಶ ದ್ವಾರದಿಂದ ಜನರು ಪ್ರಾಣ ಉಳಿಸಿಕೊಳ್ಳಲು ಹೊರಗೆ ಓಡಿ ಬರುತ್ತಿರುವ ದೃಶ್ಯವನ್ನು ಕಂಡಿದ್ದಾರೆ.
ಥಾಯ್ಲೆಂಡ್ ಪ್ರಧಾನಿ ಅನುಟಿನ್ ಚಾರ್ನ್ವಿರಾಕುಲ್ (Anutin Charnvirakul) ಮಾಧ್ಯಮಗಳಿಗೆ ಮಾಹಿತಿ ನೀಡಿ, ಇದುವರೆಗೆ 27 ಮೃತದೇಹಗಳನ್ನು ಹೊರತೆಗೆದಿರುವುದಾಗಿ ತಿಳಿಸಿದ್ದಾರೆ.
ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಆದರೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಈ ಕುರಿತು ತನಿಖೆ ಮುಂದುವರಿದಿದೆ.
ಅಗ್ನಿ ಅವಘಡ ಸಂಭವಿಸಿದ ಬಾರ್ ಬ್ಯಾಂಕಾಕ್ನ ಚತುಚಕ್ (Chatuchak) ಜಿಲ್ಲೆಯಲ್ಲಿ ಇದ್ದು, ಸ್ಥಳೀಯರು ಹಾಗೂ ಪ್ರವಾಸಿಗರು ಹೆಚ್ಚಾಗಿ ಭೇಟಿ ನೀಡುವ ಜನಪ್ರಿಯ ರೆಸ್ಟೋರೆಂಟ್ ಮತ್ತು ಮನರಂಜನಾ ಕೇಂದ್ರವಾಗಿದೆ.


