ನವದೆಹಲಿ: ವಯೋವೃದ್ಧರು ಹಾಗೂ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಕೈದಿಗಳ ಶೀಘ್ರ ಅಥವಾ ಅವಧಿಗೂ ಮುನ್ನ ಬಿಡುಗಡೆಗೆ ಸಂಬಂಧಿಸಿದಂತೆ ಸಮಗ್ರ ನೀತಿ ರೂಪಿಸಿ ಜಾರಿಗೆ ತರಬೇಕು ಎಂದು ದೇಶದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.
ಈ ನೀತಿಯನ್ನು ಮೂರು ತಿಂಗಳೊಳಗೆ ರೂಪಿಸಿ ಅಧಿಕೃತವಾಗಿ ಪ್ರಕಟಿಸಬೇಕು ಎಂದು ನ್ಯಾಯಾಲಯ ಆದೇಶಿಸಿದ್ದು, ದೇಶಾದ್ಯಂತ ಇಂತಹ ಪ್ರಕರಣಗಳ ಪರಿಗಣನೆಗೆ ಏಕರೂಪದ ವ್ಯವಸ್ಥೆ ಜಾರಿಯಾಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದೆ.
ನ್ಯಾಯಮೂರ್ತಿಗಳಾದ ವಿಕ್ರಂ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು, ವಯೋವೃದ್ಧ ಹಾಗೂ ಗಂಭೀರ ಅನಾರೋಗ್ಯದಿಂದ ಬಳಲುತ್ತಿರುವ ಕೈದಿಗಳ ಬಿಡುಗಡೆಗೆ ಮಾನವೀಯ ಮತ್ತು ಏಕರೂಪದ ವ್ಯವಸ್ಥೆ ಕಲ್ಪಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶ ನೀಡಿತು.
ಸಂವಿಧಾನದ 142ನೇ ವಿಧಿಯಡಿ ನ್ಯಾಯಾಲಯಕ್ಕೆ ಇರುವ ವಿಶೇಷ ಅಧಿಕಾರವನ್ನು ಬಳಸಿಕೊಂಡು ಈ ನಿರ್ದೇಶನಗಳನ್ನು ಹೊರಡಿಸಲಾಗಿದೆ.
ಇದೇ ವೇಳೆ, ಶೀಘ್ರ ಅಥವಾ ಅವಧಿಗೂ ಮುನ್ನ ಬಿಡುಗಡೆಗಾಗಿ ಸಲ್ಲಿಸುವ ಅರ್ಜಿಗಳ ಪರಿಶೀಲನೆ ಪ್ರಕ್ರಿಯೆಯನ್ನು ‘ಇ-ಪ್ರಿಸನ್ಸ್ (e-Prisons)’ ಪೋರ್ಟಲ್ಗೆ ಸಂಯೋಜಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಇದರಿಂದ ಸಂಪೂರ್ಣ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಹೆಚ್ಚಲಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.


