ನವದೆಹಲಿ: ಅಫ್ಘಾನಿಸ್ತಾನದ ನೂರಿಸ್ತಾನ್ ಪ್ರಾಂತ್ಯದಲ್ಲಿ ಸಂಭವಿಸಿದ ಪ್ರವಾಹದಿಂದ ಸಂಕಷ್ಟಕ್ಕೊಳಗಾದ ಜನರ ನೆರವಿಗಾಗಿ ಭಾರತ ಮಾನವೀಯ ಪರಿಹಾರ ಸಾಮಗ್ರಿಗಳನ್ನು ರವಾನಿಸಿದೆ.
ಭಾರತ ಸರ್ಕಾರವು ಆಹಾರ ಪದಾರ್ಥಗಳು, ಕುಟುಂಬಗಳಿಗೆ ಅಗತ್ಯವಾದ ಟೆಂಟ್ಗಳು ಸೇರಿದಂತೆ ವಿವಿಧ ಪರಿಹಾರ ಸಾಮಗ್ರಿಗಳನ್ನು ಅಫ್ಘಾನಿಸ್ತಾನದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ (National Disaster Management Authority – NDMA) ಹಸ್ತಾಂತರಿಸಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, “ಈ ಕಠಿಣ ಸಮಯದಲ್ಲಿ ಭಾರತ ಅಫ್ಘಾನಿಸ್ತಾನದ ಜನರೊಂದಿಗೆ ದೃಢವಾಗಿ ನಿಂತಿದೆ” ಎಂದು ತಿಳಿಸಿದೆ.
ನೂರಿಸ್ತಾನ್ ಪ್ರದೇಶದಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹದಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ಅವರಿಗೆ ತುರ್ತು ನೆರವು ಒದಗಿಸುವ ಉದ್ದೇಶದಿಂದ ಭಾರತ ಈ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದೆ.
ಭಾರತವು ಮಾನವೀಯ ನೆರವು ಹಾಗೂ ವಿಪತ್ತು ಪರಿಹಾರ ಕಾರ್ಯಗಳಲ್ಲಿ ಅಫ್ಘಾನಿಸ್ತಾನಕ್ಕೆ ನಿರಂತರವಾಗಿ ಬೆಂಬಲ ನೀಡುತ್ತಿದ್ದು, ಈ ನೆರವು ಉಭಯ ರಾಷ್ಟ್ರಗಳ ನಡುವಿನ ಮಾನವೀಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಿದೆ.


