ನವದೆಹಲಿ: ಸಾರ್ವಜನಿಕ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ರೂಪಿಸಲಾದ ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯ ವಿಧಾನಗಳ ತಡೆ) ತಿದ್ದುಪಡಿ ಮಸೂದೆ–2026 ಕುರಿತು ಲೋಕಸಭೆಯಲ್ಲಿ ಇಂದು ಮತ್ತೆ ಚರ್ಚೆ ಮುಂದುವರಿಯಲಿದೆ. ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಖಾತೆ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ನಿನ್ನೆ ಮಸೂದೆಯನ್ನು ಸದನದಲ್ಲಿ ಮಂಡಿಸಿದ್ದರು.
ಈ ಮಸೂದೆ, ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯ ವಿಧಾನಗಳ ತಡೆ) ಕಾಯ್ದೆ–2024ಕ್ಕೆ ತಿದ್ದುಪಡಿ ತರಲಿದ್ದು, ಪರೀಕ್ಷಾ ಅಕ್ರಮಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾದವರಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ, ₹10 ಕೋಟಿ ವರೆಗೆ ದಂಡ ಹಾಗೂ ಅವರ ಆಸ್ತಿಯನ್ನು ಜಪ್ತಿ ಮಾಡುವಂತಹ ಕಠಿಣ ಕ್ರಮಗಳನ್ನು ಒಳಗೊಂಡಿದೆ.
ಅಕ್ರಮ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ವಿಶೇಷ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವುದನ್ನು ಮಸೂದೆ ಕಡ್ಡಾಯಗೊಳಿಸಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ ದಿನಾಂಕದಿಂದ ಎರಡು ತಿಂಗಳೊಳಗೆ ತನಿಖೆ ಪೂರ್ಣಗೊಳ್ಳಬೇಕು ಹಾಗೂ ಚಾರ್ಜ್ಶೀಟ್ ಸಲ್ಲಿಕೆಯಾದ ಮೂರು ತಿಂಗಳೊಳಗೆ ವಿಚಾರಣೆ ಮುಗಿಯಬೇಕು ಎಂಬ ಕಟ್ಟುನಿಟ್ಟಿನ ಗಡುವನ್ನೂ ನಿಗದಿಪಡಿಸಲಾಗಿದೆ.
ಮಸೂದೆ ಮಂಡಿಸಿದ ಡಾ. ಜಿತೇಂದ್ರ ಸಿಂಗ್, ದೇಶದ ವಿದ್ಯಾರ್ಥಿಗಳು ಮತ್ತು ಯುವಜನರ ಭವಿಷ್ಯವನ್ನು ರಕ್ಷಿಸುವ ಸರ್ಕಾರದ ಬದ್ಧತೆಯನ್ನು ಈ ಕಾನೂನು ಮತ್ತೊಮ್ಮೆ ದೃಢಪಡಿಸುತ್ತದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಯುವಕರ ಭವಿಷ್ಯದೊಂದಿಗೆ ಯಾರೂ ಆಟವಾಡಲು ಅವಕಾಶ ನೀಡುವುದಿಲ್ಲ ಎಂಬ ಸಂಕಲ್ಪವನ್ನು ಇದು ಪ್ರತಿಬಿಂಬಿಸುತ್ತದೆ ಎಂದರು.
ಹಿಂದಿನ ಕಾಂಗ್ರೆಸ್ ಹಾಗೂ ಯುಪಿಎ ಆಡಳಿತದ ಅವಧಿಯಲ್ಲಿ ನಡೆದ ಪ್ರಶ್ನೆಪತ್ರಿಕೆ ಸೋರಿಕೆ ಘಟನೆಗಳನ್ನು ಉಲ್ಲೇಖಿಸಿದ ಅವರು, ಅಂಥ ಪ್ರಕರಣಗಳನ್ನು ಎದುರಿಸಲು ಸಮಗ್ರ ಕಾನೂನು ಇರಲಿಲ್ಲ. ಇದೇ ಕಾರಣಕ್ಕೆ ಮೋದಿ ಸರ್ಕಾರವು 2024ರಲ್ಲಿ ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಡೆ ಕಾಯ್ದೆಯನ್ನು ಜಾರಿಗೆ ತಂದಿದೆ ಎಂದು ತಿಳಿಸಿದರು.
ಚರ್ಚೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್, ಶಿಕ್ಷಣ ಕ್ಷೇತ್ರದ ಬಗ್ಗೆ ಸರ್ಕಾರ ಗಂಭೀರವಾಗಿಲ್ಲ ಎಂದು ಆರೋಪಿಸಿದರು.
ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್, ಈ ಮಸೂದೆ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆಯನ್ನು ಖಚಿತಪಡಿಸುವ ಐತಿಹಾಸಿಕ ಕ್ರಮ ಎಂದು ಬಣ್ಣಿಸಿದರು. ಪರೀಕ್ಷಾ ಮಾಫಿಯಾ ಈಗ ರಾಜ್ಯಗಳ ಗಡಿ ದಾಟಿದ ಸಂಘಟಿತ ಅಪರಾಧ ಜಾಲವಾಗಿ ಬೆಳೆಯುತ್ತಿರುವುದರಿಂದ ಇಂತಹ ಕಾನೂನು ಕಾಲದ ಅಗತ್ಯವಾಗಿದೆ ಎಂದು ಹೇಳಿದರು.
ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ವಿವಿಧ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮುಂದುವರಿಯುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು. 2024ರಲ್ಲಿ ಕಾನೂನು ಜಾರಿಯಾದರೂ ಈ ವರ್ಷವೂ ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಅವರು ಟೀಕಿಸಿದರು.
ಎಐಟಿಸಿ ಸಂಸದ ಅಭಿಷೇಕ್ ಬ್ಯಾನರ್ಜಿ, ಟಿಡಿಪಿಯ ಲಾವು ಶ್ರೀಕೃಷ್ಣ ದೇವರಾಯಲು ಹಾಗೂ ಶಿವಸೇನೆಯ ಡಾ. ಶ್ರೀಕಾಂತ್ ಶಿಂಡೆ ಮಸೂದೆಗೆ ಬೆಂಬಲ ವ್ಯಕ್ತಪಡಿಸಿದರು. ಟಿಡಿಪಿ ಸಂಸದರು ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಸಮಿತಿಗಳನ್ನು ವಿಕೇಂದ್ರೀಕರಿಸುವಂತೆ ಸಲಹೆ ನೀಡಿದರು.
ಡಿಎಂಕೆಯ ದಯಾನಿಧಿ ಮಾರನ್, ನೀಟ್ ಪರೀಕ್ಷೆಯೇ ಮೂಲ ಸಮಸ್ಯೆಯಾಗಿದ್ದು, ಅದು ಸಮಾನ ಅವಕಾಶ ಒದಗಿಸುತ್ತಿಲ್ಲ ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸುವಲ್ಲಿ ಸರ್ಕಾರ ವಿಫಲವಾಗಿದೆ ಹಾಗೂ ಶಿಕ್ಷಣ ವ್ಯವಸ್ಥೆ ದುರ್ಬಲಗೊಂಡಿದೆ ಎಂದು ಆರೋಪಿಸಿದರು. ಈ ವೇಳೆ ಅವರು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ತೀವ್ರ ವಾಗ್ವಾದ ನಡೆಯಿತು. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ಕಿರಣ್ ರಿಜಿಜು, ತಮ್ಮ ಆರೋಪಗಳಿಗೆ ದಾಖಲೆ ಒದಗಿಸುವಂತೆ ಅಥವಾ ಸದನದ ಕ್ಷಮೆ ಕೇಳುವಂತೆ ಪ್ರಿಯಾಂಕಾ ಗಾಂಧಿ ಅವರನ್ನು ಒತ್ತಾಯಿಸಿದರು.
ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ದೇಶದ ವಿದ್ಯಾರ್ಥಿಗಳಿಗೆ ರಾಜಕೀಯವಲ್ಲ, ತಮ್ಮ ಭವಿಷ್ಯವನ್ನು ರಕ್ಷಿಸುವ ನ್ಯಾಯಸಮ್ಮತ ಪರೀಕ್ಷಾ ವ್ಯವಸ್ಥೆ ಬೇಕಾಗಿದೆ ಎಂದು ಹೇಳಿದರು. ಕೋಟ್ಯಂತರ ಕುಟುಂಬಗಳಿಗೆ ನ್ಯಾಯಯುತ ಪರೀಕ್ಷೆಯೇ ಅವಕಾಶದ ದ್ವಾರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಇದಲ್ಲದೆ ಸುಪ್ರಿಯಾ ಸುಳೆ, ಡಿಂಪಲ್ ಯಾದವ್, ಅನುರಾಗ್ ಠಾಕೂರ್, ಶಶಾಂಕ್ ಮಣಿ, ಕೆ.ಸಿ. ವೇಣುಗೋಪಾಲ್, ಎಸ್. ವೆಂಕಟೇಶನ್, ಗುರುಮೂರ್ತಿ ಮದ್ದಿಲ, ಅಭಯ್ ಕುಮಾರ್ ಸಿನ್ಹಾ, ಅಸಾದುದ್ದೀನ್ ಓವೈಸಿ ಹಾಗೂ ಹರ್ಸಿಮ್ರತ್ ಕೌರ್ ಬಾದಲ್ ಸೇರಿದಂತೆ ಹಲವು ಸದಸ್ಯರು ಚರ್ಚೆಯಲ್ಲಿ ಭಾಗವಹಿಸಿದರು.
ಸದನದಲ್ಲಿ ಚರ್ಚೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ, ಅಧ್ಯಕ್ಷತೆ ವಹಿಸಿದ್ದ ಸಂಧ್ಯಾ ರಾಯ್ ಅವರು ಸಭೆಯನ್ನು ಇಂದು ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಿದರು.


