ಕೋಲ್ಕತ್ತಾ: ಸಾರ್ವಜನಿಕರ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸುವ ಉದ್ದೇಶದಿಂದ ಪಶ್ಚಿಮ ಬಂಗಾಳ ಸರ್ಕಾರವು ಸರ್ಕಾರಿ ಕಚೇರಿಗಳಲ್ಲಿ ‘ಜನತಾ ದರ್ಬಾರ್’ (Janatar Darbar) ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ.
ಈ ಕುರಿತು ರಾಜ್ಯದ ಮುಖ್ಯ ಕಾರ್ಯದರ್ಶಿ ಮನೋಜ್ ಅಗರ್ವಾಲ್ ಅವರು ಜಿಲ್ಲೆಯಿಂದ ಬ್ಲಾಕ್ ಮಟ್ಟದವರೆಗಿನ ಕ್ಷೇತ್ರಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಪ್ರತಿ ಮಂಗಳವಾರ ಮತ್ತು ಗುರುವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅಧಿಕಾರಿಗಳು ಸಾರ್ವಜನಿಕರನ್ನು ನೇರವಾಗಿ ಭೇಟಿಯಾಗಿ ಅವರ ಸಮಸ್ಯೆ ಹಾಗೂ ಅಹವಾಲುಗಳನ್ನು ಆಲಿಸಬೇಕು ಎಂದು ಸೂಚಿಸಲಾಗಿದೆ.
ಈ ಅವಧಿಯಲ್ಲಿ ಅಧಿಕಾರಿಗಳನ್ನು ಭೇಟಿಯಾಗಲು ಸಾರ್ವಜನಿಕರು ಮುಂಗಡವಾಗಿ ಯಾವುದೇ ಅಪಾಯಿಂಟ್ಮೆಂಟ್ ಪಡೆಯುವ ಅಗತ್ಯವಿರುವುದಿಲ್ಲ.
ಅಧಿಕಾರಿಗಳು ಕಡ್ಡಾಯವಾಗಿ ಲಭ್ಯವಿರಬೇಕು
ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು (SDO), ಬ್ಲಾಕ್ ಅಭಿವೃದ್ಧಿ ಅಧಿಕಾರಿಗಳು (BDO), ಪುರಸಭೆ ಆಯುಕ್ತರು, ಪೊಲೀಸ್ ಅಧಿಕಾರಿಗಳು ಸೇರಿದಂತೆ ಕ್ಷೇತ್ರಮಟ್ಟದ ಅಧಿಕಾರಿಗಳು ನಿಗದಿತ ಸಮಯದಲ್ಲಿ ಕಚೇರಿಯಲ್ಲಿ ಲಭ್ಯವಿರಬೇಕು ಎಂದು ಸೂಚಿಸಲಾಗಿದೆ.
ಅಹವಾಲು ಸ್ವೀಕರಿಸುವ ಸಮಯದಲ್ಲಿ ಯಾವುದೇ ಸಭೆ ಅಥವಾ ಅಧಿಕೃತ ಕಾರ್ಯಕ್ರಮಗಳನ್ನು ನಿಗದಿಪಡಿಸಬಾರದು ಎಂಬುದಾಗಿಯೂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸಾರ್ವಜನಿಕರು ಸಂಪರ್ಕಿಸಬೇಕಾದ ದಿನ, ಸಮಯ, ಸಂಬಂಧಪಟ್ಟ ಅಧಿಕಾರಿಗಳ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ವಿಳಾಸಗಳನ್ನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಅಧಿಕೃತ ವೆಬ್ಸೈಟ್ಗಳಲ್ಲಿ ಪ್ರಕಟಿಸಲಾಗುತ್ತದೆ.
‘ಅಪ್ನಾರ್ ಸರ್ಕಾರ್ ಅಪ್ನಾರ್ ಪಾಶೆ’ ಪೋರ್ಟಲ್ನಲ್ಲಿ ದಾಖಲೆ
ಜನರಿಂದ ಸ್ವೀಕರಿಸುವ ಪ್ರತಿಯೊಂದು ದೂರನ್ನು ಹಾಗೂ ಅದರ ಮೇಲೆ ಕೈಗೊಂಡ ಕ್ರಮದ ವಿವರಗಳನ್ನು ‘ಅಪ್ನಾರ್ ಸರ್ಕಾರ್ ಅಪ್ನಾರ್ ಪಾಶೆ’ ಪೋರ್ಟಲ್ನಲ್ಲಿ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಈ ಯೋಜನೆಯ ಅನುಷ್ಠಾನ ಹಾಗೂ ಸಾರ್ವಜನಿಕರ ದೂರುಗಳ ಪರಿಹಾರದ ಪ್ರಗತಿಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮೇಲ್ವಿಚಾರಣೆ ಮಾಡಲಿದೆ.
ಆನ್ಲೈನ್ ಸೇವೆಗಳು ಈಗಾಗಲೇ ಲಭ್ಯವಿದ್ದರೂ, ಡಿಜಿಟಲ್ ವೇದಿಕೆಗಳನ್ನು ಬಳಸಲು ಇನ್ನೂ ಹಿಂಜರಿಯುವ ಅಥವಾ ಅಷ್ಟಾಗಿ ಪರಿಚಯವಿಲ್ಲದ ಜನರಿಗೆ ಈ ವ್ಯವಸ್ಥೆ ಹೆಚ್ಚು ಅನುಕೂಲವಾಗಲಿದೆ ಎಂದು ಸರ್ಕಾರ ನಿರೀಕ್ಷಿಸಿದೆ.
ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಮುಂದೆ ನೇರವಾಗಿ ಮಂಡಿಸಲು ಅವಕಾಶ ಕಲ್ಪಿಸುವ ಮೂಲಕ ಸರ್ಕಾರ ಮತ್ತು ಜನರ ನಡುವಿನ ನೇರ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವುದು ಈ ಉಪಕ್ರಮದ ಪ್ರಮುಖ ಉದ್ದೇಶವಾಗಿದೆ.


