ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಎನ್ಸಿಆರ್ ಪ್ರದೇಶದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೆಹಲಿ, ನೋಯ್ಡಾ ಹಾಗೂ ಗಾಜಿಯಾಬಾದ್ನ ಪ್ರಮುಖ ದೇವಾಲಯಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಹಬ್ಬದ ಹಿನ್ನೆಲೆಯಲ್ಲಿ ವಿಶೇಷವಾಗಿ ಅಲಂಕರಿಸಲಾಗಿದೆ.
ಜನ್ಮಾಷ್ಟಮಿ ಅಂಗವಾಗಿ ಬೆಳಗ್ಗಿನಿಂದಲೇ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಮಂಗಳಾರತಿ ನಡೆಯುತ್ತಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಗಳಿಗೆ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆಯುತ್ತಿದ್ದಾರೆ.
ಪ್ರಮುಖ ದೇವಾಲಯಗಳಲ್ಲಿ ವಿಶೇಷ ಕಾರ್ಯಕ್ರಮ
ದೆಹಲಿ ಬಿರ್ಲಾ ಮಂದಿರ, ಈಸ್ಟ್ ಆಫ್ ಕೈಲಾಶ್ ಮತ್ತು ಪಂಜಾಬಿ ಬಾಗ್ನ ಇಸ್ಕಾನ್ ದೇವಾಲಯಗಳು ಹಾಗೂ ದ್ವಾರಕಾದಲ್ಲಿರುವ ಇಸ್ಕಾನ್ ದ್ವಾರಕಾಧೀಶ ದೇವಾಲಯದಲ್ಲಿ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ದೇವಾಲಯಗಳಲ್ಲಿ ಅಲಂಕಾರ, ಭಜನೆ, ಕೀರ್ತನೆ ಹಾಗೂ ವಿಶೇಷ ಪೂಜೆಗಳ ಮೂಲಕ ಹಬ್ಬದ ಸಂಭ್ರಮ ಹೆಚ್ಚಾಗಿದೆ. ರಾತ್ರಿ ಶ್ರೀಕೃಷ್ಣನ ಜನ್ಮೋತ್ಸವದ ಅಂಗವಾಗಿ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ.
ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಸಂಚಾರ ಮಾರ್ಗ ಬದಲಾವಣೆ
ಜನ್ಮಾಷ್ಟಮಿ ಆಚರಣೆಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಹಿನ್ನೆಲೆಯಲ್ಲಿ ದೆಹಲಿ ಸಂಚಾರ ಪೊಲೀಸರು ಸಾರ್ವಜನಿಕರಿಗೆ ಕೆಲವು ಮಾರ್ಗಗಳನ್ನು ತಪ್ಪಿಸುವಂತೆ ಸಲಹೆ ನೀಡಿದ್ದಾರೆ.
ಇಸ್ಕಾನ್ ದೇವಾಲಯ, ರಾಮಲೀಲಾ ಮೈದಾನ ಹಾಗೂ ರೋಹಿಣಿಯ ಜಪಾನೀಸ್ ಪಾರ್ಕ್ನಲ್ಲಿ ನಡೆಯಲಿರುವ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಭಗವಾನ್ ಮಹಾವೀರ್ ಮಾರ್ಗ ಹಾಗೂ ಮಧುಬನ್ ಚೌಕ್ನಿಂದ ಹೆಲಿಪೋರ್ಟ್ವರೆಗೆ ಸಂಪರ್ಕಿಸುವ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.
ನರೆಲಾದಲ್ಲಿ ಭಕ್ತರ ದಟ್ಟಣೆ ನಿರೀಕ್ಷೆ
ನರೇಲಾದ ಖಾಟು ಶ್ಯಾಮ್ ದೆಹಲಿ ಧಾಮ್ ದೇವಸ್ಥಾನದಲ್ಲಿ ಭಕ್ತರ ಕಾಲ್ನಡಿಗೆ ಸಂಚಾರ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಇದಲ್ಲದೆ, ಧಾರ್ಮಿಕ ಮೆರವಣಿಗೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಜಿಟಿ ಕರ್ನಾಲ್ ರಸ್ತೆ ಮತ್ತು ಘಂಟಾ ಘರ್ ಚೌಕ್ ಮಾರ್ಗಗಳಲ್ಲೂ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ, ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.


