ಅಯೋಧ್ಯೆ: ಶ್ರೀರಾಮ ಮಂದಿರಕ್ಕೆ ಸಂಬಂಧಿಸಿದ ದೇಣಿಗೆ ಸಂಗ್ರಹದಲ್ಲಿನ ಅಕ್ರಮಗಳ ಆರೋಪದ ಪ್ರಕರಣದಲ್ಲಿ ಬಂಧಿತರಾಗಿರುವ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಅಯೋಧ್ಯೆಯ ನ್ಯಾಯಾಲಯವು ಇನ್ನೂ 14 ದಿನಗಳ ಕಾಲ ವಿಸ್ತರಿಸಿದೆ.
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಪ್ರತಿಭಾ ನಾರಾಯಣ್ ಅವರು ಈ ಆದೇಶ ನೀಡಿದ್ದು, ಆರೋಪಿಗಳನ್ನು ಜುಲೈ 27ರಂದು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಿದ್ದಾರೆ.
ಇದೇ ವೇಳೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.
ಧರ್ಮ ಸೇನಾ ಸಂಘಟನೆಯ ಅಧ್ಯಕ್ಷ ಸಂತೋಷ್ ದುಬೆ ಅವರನ್ನು ಸುಮಾರು ಒಂದು ಗಂಟೆಗಳ ಕಾಲ ವೀಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಾಗಿದೆ. ಈ ವೇಳೆ ಅವರು ಈ ಹಿಂದೆ ಮಾಡಿದ್ದ ಆರೋಪಗಳು, ಅವುಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಲಭ್ಯವಿರುವ ಸಾಕ್ಷ್ಯಗಳ ಬಗ್ಗೆ ಎಸ್ಐಟಿ ಅಧಿಕಾರಿಗಳು ವಿವರಗಳನ್ನು ಪಡೆದುಕೊಂಡಿದ್ದಾರೆ.
ವಿಚಾರಣೆ ಬಳಿಕ ಪ್ರತಿಕ್ರಿಯಿಸಿದ ಸಂತೋಷ್ ದುಬೆ, ತನಿಖಾ ತಂಡವು ಕೆಲವು ದಾಖಲೆಗಳನ್ನು ಕೇಳಿದ್ದು, ಅಗತ್ಯ ದಾಖಲೆಗಳನ್ನು ಈಗಾಗಲೇ ಎಸ್ಐಟಿಗೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.


