ಸುವೋ ಮೋಟೋ ಪ್ರಕರಣ ದಾಖಲಿಸಿದ ಎನ್‌ಎಚ್‌ಆರ್‌ಸಿ; ಎರಡು ವಾರಗಳಲ್ಲಿ ತನಿಖೆ, ಪರಿಹಾರ ವಿವರ ಸಲ್ಲಿಸಲು ಸೂಚನೆ

1 Min Read
1 Min Read

ನವದೆಹಲಿ: ಉತ್ತರ ಪ್ರದೇಶದ ನೊಯ್ಡಾದ ಒಳಚರಂಡಿ ಸಂಸ್ಕರಣಾ ಘಟಕದಲ್ಲಿ (Sewage Treatment Plant) ವಿಷಕಾರಿ ಅನಿಲ ಉಸಿರಾಡಿ ಇಬ್ಬರು ಮೃತಪಟ್ಟ ಘಟನೆ ಹಾಗೂ ಅಸ್ಸಾಂನ ಕಛಾರ್ ಜಿಲ್ಲೆಯ ಲೋಹ ಸಂಸ್ಕರಣಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟ ಪ್ರಕರಣ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಸ್ವಯಂಪ್ರೇರಿತವಾಗಿ (Suo Motu) ಪ್ರಕರಣ ದಾಖಲಿಸಿಕೊಂಡು ಸಂಬಂಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.

ನೊಯ್ಡಾ ಘಟನೆಯ ಸಂಬಂಧ ಗೌತಮ್ ಬುದ್ಧ ನಗರ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಿಗೆ ನೋಟಿಸ್ ನೀಡಿರುವ ಆಯೋಗ, ಎರಡು ವಾರಗಳೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದೆ.

ವರದಿಯಲ್ಲಿ ಘಟನೆಯ ತನಿಖೆಯ ಪ್ರಗತಿ, ಮೃತರ ಕುಟುಂಬಗಳಿಗೆ ನೀಡಲಾದ ಪರಿಹಾರದ ವಿವರ ಸೇರಿದಂತೆ ಎಲ್ಲಾ ಮಾಹಿತಿಯನ್ನು ಒಳಗೊಂಡಿರಬೇಕು ಎಂದು ಆಯೋಗ ತಿಳಿಸಿದೆ.

ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ನಿಜವಾಗಿದ್ದರೆ, ಇದು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯ ಪ್ರಕರಣ ಎಂದು ಪರಿಗಣಿಸಬೇಕಾಗುತ್ತದೆ ಎಂದು ಎನ್‌ಎಚ್‌ಆರ್‌ಸಿ ಅಭಿಪ್ರಾಯಪಟ್ಟಿದೆ.

ಇದೇ ವೇಳೆ, ಅಸ್ಸಾಂನ ಕಛಾರ್ ಜಿಲ್ಲೆಯ ಲೋಹ ಸಂಸ್ಕರಣಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಪ್ರಕರಣಕ್ಕೂ ಆಯೋಗ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ.

ಈ ಸಂಬಂಧ ಅಸ್ಸಾಂ ಮುಖ್ಯ ಕಾರ್ಯದರ್ಶಿ ಹಾಗೂ ಕಛಾರ್ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ನೋಟಿಸ್ ಜಾರಿ ಮಾಡಿರುವ ಆಯೋಗ, ಎರಡು ವಾರಗಳಲ್ಲಿ ವಿವರವಾದ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ.

ಗಾಯಾಳುಗಳ ಆರೋಗ್ಯ ಸ್ಥಿತಿ, ಮೃತರ ಹಾಗೂ ಗಾಯಗೊಂಡ ಕಾರ್ಮಿಕರ ಕುಟುಂಬಗಳಿಗೆ ನೀಡಲಾದ ಪರಿಹಾರದ ವಿವರಗಳನ್ನು ವರದಿಯಲ್ಲಿ ಸೇರಿಸಬೇಕು ಎಂದು ಎನ್‌ಎಚ್‌ಆರ್‌ಸಿ ಸೂಚಿಸಿದೆ.

Share This Article