ಜಕಾರ್ತಾ: ಇಂಡೋನೇಷ್ಯಾದಲ್ಲಿ ಅಸಾಮಾನ್ಯವಾಗಿ ಒಣ ಹವಾಮಾನ ಮುಂದುವರಿದಿರುವ ಹಿನ್ನೆಲೆಯಲ್ಲಿ ಕಾಡ್ಗಿಚ್ಚಿನ ಪ್ರಮಾಣ ಹೆಚ್ಚಾಗಿದೆ. ದೇಶದ ವಿವಿಧ ಭಾಗಗಳಲ್ಲಿ ವ್ಯಾಪಿಸಿರುವ ಬೆಂಕಿಯನ್ನು ನಿಯಂತ್ರಿಸಲು ಅಧಿಕಾರಿಗಳು ನೂರಾರು ಅಗ್ನಿಶಾಮಕ ಸಿಬ್ಬಂದಿ ಹಾಗೂ ಹೆಲಿಕಾಪ್ಟರ್ಗಳನ್ನು ಕಾರ್ಯಾಚರಣೆಗೆ ಇಳಿಸಿದ್ದಾರೆ.
ದೇಶಾದ್ಯಂತ ಕಾಡ್ಗಿಚ್ಚಿನಿಂದ ಇದುವರೆಗೆ 1.07 ಲಕ್ಷ ಹೆಕ್ಟೇರ್ಗೂ ಹೆಚ್ಚು ಪ್ರದೇಶ ಹಾನಿಗೊಳಗಾಗಿದೆ ಎಂದು ವರದಿಯಾಗಿದೆ. ಒಣಹವಾಮಾನದ ಕಾರಣ ಬೆಂಕಿ ಮತ್ತಷ್ಟು ಪ್ರದೇಶಗಳಿಗೆ ಹರಡುವ ಆತಂಕ ಎದುರಾಗಿದ್ದು, ಅಗ್ನಿಶಾಮಕ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.
ಬ್ರೋಮೊ ಪರ್ವತ ಪ್ರದೇಶದಲ್ಲೂ ಭಾರಿ ಬೆಂಕಿ
ಪೂರ್ವ ಜಾವಾದ ಬ್ರೋಮೊ ಟೆಂಗರ್ ಸೆಮೆರು ರಾಷ್ಟ್ರೀಯ ಉದ್ಯಾನವನದಲ್ಲಿ ಅತ್ಯಂತ ದೊಡ್ಡ ಪ್ರಮಾಣದ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಇಲ್ಲಿ ಸುಮಾರು 743 ಹೆಕ್ಟೇರ್ ಪ್ರದೇಶ ಬೆಂಕಿಗಾಹುತಿಯಾಗಿದೆ.
ಬೆಂಕಿಯ ಹಿನ್ನೆಲೆಯಲ್ಲಿ ಜನಪ್ರಿಯ ಪ್ರವಾಸಿ ತಾಣವಾಗಿರುವ ರಾಷ್ಟ್ರೀಯ ಉದ್ಯಾನವನದ ಕೆಲವು ಭಾಗಗಳನ್ನು, ಮೌಂಟ್ ಬ್ರೋಮೊ ಸುತ್ತಮುತ್ತಲಿನ ಪ್ರದೇಶ ಸೇರಿದಂತೆ, ಮುಂದಿನ ಆದೇಶದವರೆಗೆ ಮುಚ್ಚಲಾಗಿದೆ.
ಇದುವರೆಗೆ ಕಾಡ್ಗಿಚ್ಚಿನಿಂದ ಯಾವುದೇ ಸಾವು-ನೋವು ಸಂಭವಿಸಿರುವ ಅಥವಾ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿರುವ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಳೆ ತರಿಸಲು ಮೋಡ ಬಿತ್ತನೆಗೆ ಅಡ್ಡಿ
ಇಂಡೋನೇಷ್ಯಾದ ರಾಜಕೀಯ ಮತ್ತು ಭದ್ರತಾ ವ್ಯವಹಾರಗಳ ಸಮನ್ವಯ ಸಚಿವ ಜಮಾರಿ ಚಾನಿಯಾಗೋ ಮಾತನಾಡಿ, ಆಗಸ್ಟ್ 18ರವರೆಗೆ ಮೋಡ ಬಿತ್ತನೆ ಕಾರ್ಯಾಚರಣೆ ನಡೆಸುವ ಸಾಧ್ಯತೆ ಕಡಿಮೆ ಎಂದು ತಿಳಿಸಿದ್ದಾರೆ.
ಮಳೆ ತರಲು ಅಗತ್ಯವಿರುವ ಸೂಕ್ತ ಮಳೆಭರಿತ ಮೋಡಗಳು ಲಭ್ಯವಿಲ್ಲದ ಕಾರಣ ಮೋಡ ಬಿತ್ತನೆ ಕಾರ್ಯಾಚರಣೆ ನಡೆಸುವುದು ಕಷ್ಟಕರವಾಗಿದೆ ಎಂದು ಅವರು ವಿವರಿಸಿದ್ದಾರೆ.
ಹೀಗಾಗಿ ಅಗ್ನಿಶಾಮಕ ಸಿಬ್ಬಂದಿ ಸದ್ಯ ವಿಮಾನ ಮತ್ತು ಹೆಲಿಕಾಪ್ಟರ್ಗಳ ಮೂಲಕ ನೀರು ಸುರಿಸುವ ‘ವಾಟರ್ ಬಾಂಬಿಂಗ್’ ಕಾರ್ಯಾಚರಣೆ ಹಾಗೂ ನೆಲಮಟ್ಟದ ಅಗ್ನಿಶಾಮಕ ತಂಡಗಳ ನೆರವಿನಿಂದ ಬೆಂಕಿ ನಿಯಂತ್ರಿಸಲು ಶ್ರಮಿಸುತ್ತಿದ್ದಾರೆ.
ಒಣ ಹವಾಮಾನ ಮುಂದುವರಿದಿರುವ ಹಿನ್ನೆಲೆಯಲ್ಲಿ ಕಾಡ್ಗಿಚ್ಚು ಮತ್ತಷ್ಟು ವ್ಯಾಪಿಸದಂತೆ ಅಧಿಕಾರಿಗಳು ಪರಿಸ್ಥಿತಿಯ ಮೇಲೆ ನಿರಂತರ ನಿಗಾ ವಹಿಸಿದ್ದಾರೆ.


