ನವದೆಹಲಿ: ಮಲೇಷ್ಯಾದಲ್ಲಿ ಬಂಧಿತರಾಗಿದ್ದ ಬಂಬಿಹಾ ಗ್ಯಾಂಗ್ಗೆ ಸಂಬಂಧಿಸಿದ ಮೂವರು ಪರಾರಿಯಾಗಿದ್ದ ಆರೋಪಿಗಳನ್ನು ಭಾರತೀಯ ತನಿಖಾ ಸಂಸ್ಥೆಗಳು ದೇಶಕ್ಕೆ ಕರೆತಂದಿವೆ. ಜಸ್ಪ್ರೀತ್ ಸಿಂಗ್, ಅಜಯ್ ಸಿಂಗ್ ಮತ್ತು ಪವನ್ದೀಪ್ ಸಿಂಗ್ ಅವರನ್ನು ಭಾರತಕ್ಕೆ ಗಡಿಪಾರು ಮಾಡಲಾಗಿದ್ದು, ಬಳಿಕ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ ಎಂದು ಗೃಹ ಸಚಿವಾಲಯದ ಕಚೇರಿ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದೆ.
ಭಾರತಕ್ಕೆ ಕರೆತರಲಾದ ಮೂವರು ಆರೋಪಿಗಳು ಸುಲಿಗೆ, ಗಡಿಯಾಚೆ ಶಸ್ತ್ರಾಸ್ತ್ರ ಮತ್ತು ಮಾದಕ ವಸ್ತುಗಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿದ್ದಾರೆ.
ಇವರ ವಿರುದ್ಧ ಲುಧಿಯಾನದಲ್ಲಿ ನಡೆದ ಗ್ರೆನೇಡ್ ದಾಳಿ ಪ್ರಯತ್ನಕ್ಕೂ ಸಂಬಂಧವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದೇಶಕ್ಕೆ ಪರಾರಿಯಾಗಿದ್ದ ಆರೋಪಿಗಳನ್ನು ಪತ್ತೆಹಚ್ಚಿ ಭಾರತಕ್ಕೆ ಕರೆತರುವ ಕಾರ್ಯಾಚರಣೆಯಲ್ಲಿ ಭಾರತೀಯ ಸಂಸ್ಥೆಗಳು ಮಹತ್ವದ ಯಶಸ್ಸು ಸಾಧಿಸಿವೆ.
2026ರಲ್ಲಿ 51 ಕುಖ್ಯಾತ ಅಪರಾಧಿಗಳ ಗಡಿಪಾರು
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸುರಕ್ಷಿತ ಮತ್ತು ಭದ್ರ ಭಾರತ ನಿರ್ಮಿಸುವ ಗುರಿಯೊಂದಿಗೆ ತನಿಖಾ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
2026ರಲ್ಲಿ ಇದುವರೆಗೆ 51 ಕುಖ್ಯಾತ ಅಪರಾಧಿಗಳನ್ನು ವಿದೇಶಗಳಿಂದ ಭಾರತಕ್ಕೆ ಗಡಿಪಾರು ಮಾಡಿಸುವಲ್ಲಿ ಭಾರತೀಯ ಸಂಸ್ಥೆಗಳು ಯಶಸ್ವಿಯಾಗಿವೆ ಎಂದು ಅವರು ತಿಳಿಸಿದ್ದಾರೆ.
ವಿದೇಶಗಳಲ್ಲಿ ತಲೆಮರೆಸಿಕೊಂಡಿರುವ ಅಪರಾಧಿಗಳನ್ನು ಪತ್ತೆಹಚ್ಚಿ ಕಾನೂನಿನ ಮುಂದೆ ತರುವ ಮೂಲಕ ದೇಶದ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಪ್ರಯತ್ನ ಮುಂದುವರಿದಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.


