ನವದೆಹಲಿ: 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿವಿಧ ಸ್ಥಳಗಳಲ್ಲಿ ಭವ್ಯ ಯೋಗ ಕಾರ್ಯಕ್ರಮಗಳು ನಡೆಯುತ್ತಿದ್ದು, ಕೇಂದ್ರ ಸಚಿವರು, ಗಣ್ಯರು, ಸಾಮಾಜಿಕ ಸಂಸ್ಥೆಗಳು ಹಾಗೂ ಸಾವಿರಾರು ಯೋಗಾಸಕ್ತರು ಉತ್ಸಾಹದಿಂದ ಭಾಗವಹಿಸಿದರು.
ಶಾಂತಿಪಥ್ನಲ್ಲಿ ಆಯೋಜಿಸಿದ್ದ ಯೋಗ ಕಾರ್ಯಕ್ರಮದಲ್ಲಿ ಕೇಂದ್ರ ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡಾ ಪಾಲ್ಗೊಂಡು ಮಾತನಾಡಿದರು. ಯೋಗವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯತ್ನವನ್ನು ಅವರು ಶ್ಲಾಘಿಸಿದರು. ಯೋಗವು ಯಾವುದೇ ಒಂದು ದೇಶಕ್ಕೆ ಸೀಮಿತವಾಗದೆ, ಇಡೀ ಮಾನವಕುಲದ ಆರೋಗ್ಯ ಮತ್ತು ಕಲ್ಯಾಣಕ್ಕಾಗಿ ವಿಶ್ವದಾದ್ಯಂತ ಅಳವಡಿಸಿಕೊಳ್ಳಬೇಕಾದ ಜೀವನಶೈಲಿ ಎಂದು ಹೇಳಿದರು.
ಇನ್ನೊಂದೆಡೆ, ಕೇಂದ್ರ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ದೆಹಲಿಯ ನೆಹರು ಪಾರ್ಕ್ನಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಭಾರತದಲ್ಲಿನ ನಾರ್ವೆ ರಾಯಭಾರಿ ಮೇ-ಎಲಿನ್ ಸ್ಟೆನರ್ ಸಹ ಯೋಗಾಭ್ಯಾಸದಲ್ಲಿ ಪಾಲ್ಗೊಂಡರು.
ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಯೋಗಾಭ್ಯಾಸ ನಡೆಸಿದರು. ಬಾಲಿವುಡ್ ನಟ ಅಕ್ಷಯ್ ಕುಮಾರ್ ಕೂಡ ಸಚಿವರೊಂದಿಗೆ ಸೇರಿ ಯೋಗದ ಮಹತ್ವವನ್ನು ಜನರಿಗೆ ಸಾರಿದರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸಹ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಆರೋಗ್ಯಕರ ಜೀವನಕ್ಕಾಗಿ ಯೋಗದ ಅಗತ್ಯತೆಯನ್ನು ಒತ್ತಿ ಹೇಳಿದರು.
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಹಾಗೂ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರು ಅಸೋಲಾ-ಭಟ್ಟಿ ವನ್ಯಜೀವಿ ಅಭಯಾರಣ್ಯದಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯೋಗಾಭ್ಯಾಸ ಮಾಡಿದರು.
ಇದೇ ವೇಳೆ, ಬ್ರಹ್ಮಕುಮಾರೀಸ್ ಸಂಸ್ಥೆ ದೆಹಲಿಯ ಕೆಂಪುಕೋಟೆ ಆವರಣದಲ್ಲಿ ವಿಶೇಷ ಯೋಗ ಕಾರ್ಯಕ್ರಮವನ್ನು ಆಯೋಜಿಸಿತ್ತು. ಆಯುಷ್ ಸಚಿವಾಲಯದ ಮಾರ್ಗಸೂಚಿಯಂತೆ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 20 ಸಾವಿರ ಯೋಗಾಸಕ್ತರು ಯೋಗಾಸನ, ಪ್ರಾಣಾಯಾಮ ಹಾಗೂ ರಾಜಯೋಗ ಧ್ಯಾನದಲ್ಲಿ ಭಾಗವಹಿಸಿದರು.
ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ದೆಹಲಿಯ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಆರೋಗ್ಯ, ಮಾನಸಿಕ ಶಾಂತಿ ಹಾಗೂ ಸಮಗ್ರ ಕಲ್ಯಾಣದ ಸಂದೇಶ ಪ್ರತಿಧ್ವನಿಸಿತು.


