ನವದೆಹಲಿ: ಇಂಗ್ಲೆಂಡ್ ಪ್ರವಾಸಕ್ಕಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 15 ಸದಸ್ಯರ ಏಕದಿನ (ODI) ತಂಡವನ್ನು ಪ್ರಕಟಿಸಿದೆ. ಜುಲೈ 14ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಸರಣಿಗೆ ಶುಭ್ಮನ್ ಗಿಲ್ ನಾಯಕತ್ವ ವಹಿಸಲಿದ್ದು, ಶ್ರೇಯಸ್ ಅಯ್ಯರ್ ಉಪನಾಯಕರಾಗಿ ನೇಮಕಗೊಂಡಿದ್ದಾರೆ.
ತಂಡದಲ್ಲಿ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮರಳಿ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಇದಲ್ಲದೆ ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್ ಹಾಗೂ ಗುರ್ನೂರ್ ಬ್ರಾರ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಜುಲೈ 14ರಂದು ಎಡ್ಜ್ಬಾಸ್ಟನ್ನಲ್ಲಿ ನಡೆಯಲಿದೆ. ಎರಡನೇ ಪಂದ್ಯ ಜುಲೈ 16ರಂದು ಕಾರ್ಡಿಫ್ನಲ್ಲಿ ಹಾಗೂ ಅಂತಿಮ ಪಂದ್ಯ ಜುಲೈ 19ರಂದು ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿದೆ.
ಇದೇ ವೇಳೆ, ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡದಲ್ಲಿ ಪ್ರಸಿದ್ಧ್ ಕೃಷ್ಣ ಅವರನ್ನು ಸೇರಿಸಲಾಗಿದೆ. ಐಪಿಎಲ್ 2026ರ ವೇಳೆ ಪಾದದ ಗಾಯಕ್ಕೆ ಒಳಗಾದ ಕಾರಣ ವರುಣ್ ಚಕ್ರವರ್ತಿ ಸರಣಿಯಿಂದ ಹೊರಬಿದ್ದಿದ್ದಾರೆ.
ಭಾರತ ತಂಡ ಜೂನ್ 26 ಮತ್ತು 28ರಂದು ಬೆಲ್ಫಾಸ್ಟ್ನಲ್ಲಿ ಐರ್ಲೆಂಡ್ ವಿರುದ್ಧ ಟಿ20 ಸರಣಿ ಆಡಲಿದ್ದು, ಬಳಿಕ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿ ಹಾಗೂ ನಂತರ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲಿದೆ.


