ದೇಶದ ವಿವಿಧ ರಾಜ್ಯಗಳಲ್ಲಿ ಮಳೆಯ ಚಟುವಟಿಕೆಗಳು ತೀವ್ರಗೊಳ್ಳಲಿದ್ದು, ಕೆಲ ಭಾಗಗಳಲ್ಲಿ ಉಷ್ಣ ಅಲೆ (ಹೀಟ್ವೇವ್) ಪರಿಸ್ಥಿತಿಯೂ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಐಎಂಡಿ ವರದಿ ಪ್ರಕಾರ, ಇಂದು ಕರಾವಳಿ ಕರ್ನಾಟಕ, ಜಾರ್ಖಂಡ್, ಕೊಂಕಣ-ಗೋವಾ, ಮಹಾರಾಷ್ಟ್ರ, ತೆಲಂಗಾಣ, ಒಡಿಶಾ, ಉಪ-ಹಿಮಾಲಯ ಪಶ್ಚಿಮ ಬಂಗಾಳ ಹಾಗೂ ಸಿಕ್ಕಿಂ ರಾಜ್ಯಗಳ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇದೇ ವೇಳೆ, ಬಿಹಾರ, ಜಾರ್ಖಂಡ್, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಪಶ್ಚಿಮ ಮಧ್ಯಪ್ರದೇಶ ಹಾಗೂ ಪಶ್ಚಿಮ ರಾಜಸ್ಥಾನದಲ್ಲಿ ಗುಡುಗು-ಮಿಂಚು ಸಹಿತ ಬಿರುಗಾಳಿ (Thunder Squall) ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಸಿದೆ.
ಮುಂದಿನ ಎರಡು ರಿಂದ ಮೂರು ದಿನಗಳಲ್ಲಿ ದೆಹಲಿ, ಚಂಡೀಗಢ, ಹರಿಯಾಣ, ಜಮ್ಮು-ಕಾಶ್ಮೀರ, ಲಡಾಖ್, ಪಂಜಾಬ್ ಹಾಗೂ ಉತ್ತರಾಖಂಡ ಸೇರಿದಂತೆ ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಅದೇ ರೀತಿ ಅಂಡಮಾನ್-ನಿಕೋಬಾರ್ ದ್ವೀಪಗಳು, ಕರಾವಳಿ ಆಂಧ್ರಪ್ರದೇಶ, ಪೂರ್ವ ಮಧ್ಯಪ್ರದೇಶ, ಪೂರ್ವ ರಾಜಸ್ಥಾನ, ಒಡಿಶಾ, ಛತ್ತೀಸ್ಗಢ, ವಿದರ್ಭ, ತಮಿಳುನಾಡು, ಪುದುಚೇರಿ, ಕಾರೈಕಲ್, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಪ್ರದೇಶಗಳಲ್ಲಿಯೂ ಇದೇ ರೀತಿಯ ಹವಾಮಾನ ಮುಂದುವರಿಯುವ ನಿರೀಕ್ಷೆಯಿದೆ.
ಮಳೆಯ ನಡುವೆಯೇ ಬಿಹಾರ, ಪೂರ್ವ ಮಧ್ಯಪ್ರದೇಶ ಹಾಗೂ ಪೂರ್ವ ಉತ್ತರ ಪ್ರದೇಶದ ಕೆಲವು ಪ್ರತ್ಯೇಕ ಪ್ರದೇಶಗಳಲ್ಲಿ ಇಂದು ಉಷ್ಣ ಅಲೆ ಪರಿಸ್ಥಿತಿ ಕಂಡುಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹಾಗೂ ಸ್ಥಳೀಯ ಆಡಳಿತ ಮತ್ತು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಸಲಹೆ ನೀಡಲಾಗಿದೆ.


